ರಾಷ್ಟ್ರ ಶಕ್ತಿ ಕೇಂದ್ರ

ಹಿಂದೂ… ಧರ್ಮ ಮತ್ತು ಸಂಸ್ಕೃತಿ

Posted in ನಮ್ಮ ಇತಿಹಾಸ by yuvashakti on ನವೆಂಬರ್ 8, 2008

ಜಗತ್ತಿನ ಪ್ರಪ್ರಾಚೀನ ಸಂಸ್ಕೃತಿಗಳಲ್ಲಿ ಹಿಂದೂ ಸಂಸ್ಕೃತಿಗೆ ಮಹತ್ತ್ವದ ಸ್ಥಾನವಿದೆ. ಇತ್ತೀಚಿನ ದಿನಗಳಲ್ಲಿ ‘ಹಿಂದೂ’ ಎನ್ನುವುದು ‘ಜಾತಿ’ವಾಚಕ ಪದವಾಗಿ ಅರ್ಥಾಂತರಗೊಂಡಿರುವುದರಿಂದ, ಈ ಸಂಸ್ಕೃತಿಯು ಉಗಮಗೊಂಡು ಬೆಳೆದುಬಂದಿರುವ ಭಾರತ ದೇಶವನ್ನು ಆಧಾರವಾಗಿಟ್ಟುಕೊಂಡು ‘ಭಾರತೀಯ ಸಂಸ್ಕೃತಿ’ ಎಂದು ಕರೆಯುವುದು ಸೂಕ್ತವೆನಿಸುತ್ತದೆ. ಇಷ್ಟಕ್ಕೂ ‘ಹಿಂದೂ’ ಎನ್ನುವುದು ಒಂದು ಧರ್ಮ. ‘ಧರ್ಮ’ ಅಂದರೆ ‘ಜಾತಿ’ಯಲ್ಲ. ಅದು ಜೀವನ ವಿಧಾನ. ಈ ಜೀವನ ವಿಧಾನದಿಂದ ಮಾನವನ ಆಂತರಿಕ ಪ್ರಗತಿಯುಂಟಾಗಿ ‘ಸಂಸ್ಕೃತಿ’ಯೂ, ಲೌಕಿಕ ಪ್ರಗತಿಯುಂಟಾಗಿ ‘ನಾಗರಿಕತೆ’ಯೂ ಬೆಳೆದುಬಂದವು. ಆಂತರಿಕ ಬೆಳವಣಿಗೆಯ ಪರಿಣಾಮವಾದ ‘ಭಾರತೀಯ ಸಂಸ್ಕೃತಿ’ ಇಂದಿಗೂ ಉಳಿದುಬಂದಿದ್ದರೆ, ಬಾಹ್ಯ ಬೆಳವಣಿಗೆಯ ಭವ್ಯ ಕುರುಹಾಗಿದ್ದ ‘ಸಿಂಧೂ ನಾಗರಿಕತೆ’ ನಶಿಸಿಹೋಯ್ತು.
ಭಾರತದ ಇತಿಹಾಸ ಇಸವಿಗಳ ಲೆಕ್ಕಾಚಾರಕ್ಕೆ ಸಿಕ್ಕುವಂಥದ್ದಲ್ಲ. ನಮ್ಮ ವೈದಿಕ ಪರಂಪರೆಯ ಕಾಲಮಾನ ಸುಮಾರು ಕ್ರಿ.ಪೂ. ೧೦,೦೦೦ದಿಂದ ೭,೦೦೦ ವರ್ಷಗಳು ಎಂದು ಹೇಳಲಾಗುತ್ತದೆ. ಉತ್ಖನನ, ಅಧ್ಯಯನಗಳ ಪುರಾವೆಯಂತೆ, ಇದು ಕನಿಷ್ಠ ಪಕ್ಷ ಕ್ರಿ.ಪೂ. ೫,೦೦೦ವರ್ಷಗಳಿಗಿಂತ ಹಿಂದಿನದು.

ಹಿಂದೂ ಧರ್ಮದ ಮೌಲ್ಯಗಳನ್ನೊಳಗೊಂಡ ‘ಹಿಂದೂ ಜಾತಿ’- ಜಾತಿಯಾಗಿ ಗುರುತಿಸಲ್ಪಟ್ಟಿದ್ದು, ಇಸ್ಲಾಮ್, ಇಸಾಯಿ ಮತಗಳ ಉಗಮದ ನಂತರವಷ್ಟೇ. ಅವಕ್ಕೆ ಮುಂಚಿನ ಬೌದ್ಧ , ಜೈನ ಪಂಥಗಳು ಮೋಕ್ಷ ಸಾಧನೆಗಾಗಿ ಕವಲೊಡೆದ ಮಾರ್ಗಗಳಾಗಿ ಗುರುತಿಸಲ್ಪಟ್ಟಿದ್ದವು. ಹಾಗೆಂದೇ ನಾವು ಬೌದ್ಧ- ಜೈನ ಪಂಥಗಳ ದೇವತೆಗಳು, ಪುರಾಣಗಳು, ದೇವಾಲಯಗಳಲ್ಲಿ ಹಿಂದೂ ಧರ್ಮದ ಸಾಮ್ಯತೆ- ಪ್ರಭಾವಗಳನ್ನು ಧಾರಾಳವಾಗಿ ಕಾಣಬಹುದು. ದುರ್ಂತವೆಂದರೆ, ಇಂದು ಹಿಂದೂ ಜಾತಿ, ಹಿಂದೂ ಧರ್ಮದ ಉದಾತ್ತ ಮೌಲ್ಯಗಳನ್ನು ಮರೆಯುತ್ತ, ಅವನ್ನು ಅಪಮೌಲ್ಯಗೊಳಿಸುತ್ತ, ಮಾತೃಧರ್ಮಕ್ಕೆ ಧಕ್ಕೆಯುಂಟು ಮಾಡುತ್ತ ಸಾಗಿರುವುದು. ಇಂದು ನೈಜ ಹಿಂದೂ ಧರ್ಮದ ಪ್ರತಿಪಾದಕರು, ಅನುಚರರು ಕಾಣುವುದು ಅತಿ ವಿರಳ. 

ಭಾರತೀಯ ಪರಂಪರೆ ಯಾವುದೋ ಒಬ್ಬ ಚಕ್ರವರ್ತಿ, ಒಬ್ಬ ಮಹರ್ಷಿ, ಒಬ್ಬ ಪ್ರವಾದಿ ಕಟ್ಟಿಕೊಟ್ಟಿದ್ದಲ್ಲ. ಅಥವಾ ಕೆಲವೇ ಮೇಲ್ವರ್ಗದ ಜನರ ಸೊತ್ತೂ ಅಲ್ಲ. ವೇದಗಳಲ್ಲಿ ಉಲ್ಲಿಖಿತವಾಗಿರುವಂತೆ ಇದು ಪ್ರತಿಯೊಂದು ವರ್ಗದ, ವರ್ಣದ ಮಾನವನ ಕೊಡುಗೆ. ಸಿಂಧೂ ನದಿಯ ತಟದಲ್ಲಿ ಅಭಿವೃದ್ಧಿ ಹೊಂದಿದ ಈ ಸಂಸ್ಕೃತಿಯನ್ನು ಸಹಸ್ರಮಾನಗಳ ಹಿಂದಿನಿಂದಲೂ ಒಡನಾಟದಲ್ಲಿರುವ ಪರ್ಷಿಯನ್ನರು ೧ಹಿಂದೂ’ ಎಂದು ಕರೆದರು. (ಅವರಲ್ಲಿ ‘ಸ’ಕಾರ ‘ಹ’ಕಾರವಾಗಿ ಉಚ್ಚರಿಸಲ್ಪಡುತ್ತದೆ)
ಕ್ರಮೇಣ ಹಿಂದೂ ಸಂಸ್ಕೃತಿಯವರು ಆಚರಿಸುತ್ತಿದ್ದ ಸನಾತನ ಧರ್ಮ- ಹಿಂದೂ ಧರ್ಮವಾಗಿಯೂ ಅದರ ಸದಸ್ಯರು ಹಿಂದೂಗಳಾಗಿಯೂ ಸ್ಥಾಪಿತರಾದರು. ಹೀಗೊಂದು ಹೆಸರಿನಿಂದ ಬಂಧಿಸಲ್ಪಟ್ಟ ಸನಾತನ ಧರ್ಮದ ಬೆಳವಣಿಗೆ ನಿಂತುಹೋಯಿತು. ಮುಂದೆ, ಇದೇ ಚೌಕಟ್ಟಿನೊಳಗೆ ಹಲವು ಪ್ರಯೋಗಗಳು ನಡೆದು ವಿಭಿನ್ನ- ವಿಶಿಷ್ಟ ‘ಭಾರತೀಯ ಸಂಸ್ಕೃತಿಯ’ ಉಗಮವಾಯ್ತು.

ಸನಾತನ ಧರ್ಮವನ್ನು ‘ಆಧ್ಯಾತ್ಮದ ತೊಟ್ಟಿಲು’ ಎಂದೂ, ‘ಎಲ್ಲ ಧರ್ಮಗಳ ತಾಯಿ’ ಎಂದೂ ಕರೆಯಲಾಗುತ್ತದೆ. ಈ ತೊಟ್ಟಿಲನ್ನು ತೂಗಿದ ಭಾರತ, ಹತ್ತುಹಲವು ಮತಪಂಥಗಳ ಪ್ರಯೋಗಶಾಲೆಯಾಗಿ ಬಳಕೆಯಾಗಿದೆ. ಯಾವುದನ್ನೂ ತಿರಸ್ಕರಿಸದೆ, ಪ್ರತಿಯೊಂದಕ್ಕೂ ತನ್ನೊಡಲಲ್ಲಿ ಜಾಗ ನೀಡಿ ತಾಯ್ತನ ಮೆರೆದಿದೆ.

(ಮುಂದುವರೆಯುವುದು…)